ಠಾಣಾಕುಶನೂರ‌ ಹೋಬಳಿಯಲ್ಲಿ ಶಾಸಕ ಪ್ರಭು ಚವ್ಹಾಣ ಗ್ರಾಮ ಸಂಚಾರ ಪಡಿತರ ವಿತರಣೆ ಸಮಸ್ಯೆ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ

ಠಾಣಾಕುಶನೂರ‌ ಹೋಬಳಿಯಲ್ಲಿ ಶಾಸಕ ಪ್ರಭು ಚವ್ಹಾಣ ಗ್ರಾಮ ಸಂಚಾರ

ಪಡಿತರ ವಿತರಣೆ ಸಮಸ್ಯೆ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ

ಕಮಲನಗರ: ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪಡಿತರ ವಿತರಣೆಯಲ್ಲಿ ತೊಂದರೆಗಳು ಎದುರಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ತಕ್ಷಣ ಸಮಸ್ಯೆಗಳನ್ನು ಸರಿಪಡಿಸಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಮಲನಗರ ತಾಲ್ಲೂಕಿನ ಠಾಣಾ ಕುಶನೂರ ಹೋಬಳಿ ವ್ಯಾಪ್ತಿಯಲ್ಲಿನ ಲಿಂಗದಳ್ಳಿ(ಯು), ಮುಧೋಳ(ಬಿ), ತೋರ್ಣಾ ವಾಡಿ, ತೋರ್ಣಾ, ಹೊಳಸಮುದ್ರ, ಸಾವಳಿ, ಬಸನಾಳ, ಕೋರಿಯಾಳ, ಮುಧೋಳ(ಕೆ)ನಲ್ಲಿ ಗ್ರಾಮ ಸಂಚಾರ ನಡೆಸಿ ಅವರು ಮಾತನಾಡಿದರು.

ಕೆಲವು ಪಡಿತರ ಅಂಗಡಿಗಳಲ್ಲಿ ಸರಿಯಾದ ಸಮಯಕ್ಕೆ ಅಕ್ಕಿ, ಗೋಧಿ ಸೇರಿದಂತೆ ಅಗತ್ಯ ವಸ್ತುಗಳು ವಿತರಣೆ ಆಗುತ್ತಿಲ್ಲ, ಫಲಾನುಭವಿಗಳ ಹೆಸರುಗಳು ಪಟ್ಟಿಯಿಂದ ಕೈ ತಪ್ಪಿರುವುದು, ತಾಂತ್ರಿಕ ಸಮಸ್ಯೆಗಳ ಹೆಸರಿನಲ್ಲಿ ಸಾರ್ವಜನಿಕರನ್ನು ಅಲಕ್ಷ್ಯ ಮಾಡುವಂತಹ ಪ್ರಕರಣಗಳು ಕೇಳಿ ಬರುತ್ತಿವೆ. ಇಂತಹ ಸಮಸ್ಯೆಗಳಿಗೆ ನಿರ್ಲಕ್ಷ್ಯ ವಹಿಸಬಾರದೆಂದು ಹೇಳಿದರು.

ಲಿಂಗದಳ್ಳಿ(ಯು) ಗ್ರಾಮಸ್ಥರು ಪ್ರತಿ ತಿಂಗಳು ಪಡಿತರಕ್ಕಾಗಿ ಎಲ್ಲ ಕೆಲಸ ಕಾರ್ಯಗಳನ್ನು ಬಿಟ್ಟು ಪಕ್ಕದ ಊರಿಗೆ ಹೋಗಬೇಕು. ಇದರಿಂದ ವಯಸ್ಸಾದವರು, ಆರೋಗ್ಯ ಸಮಸ್ಯೆ ಇರುವವರು ಒಳಗೊಂಡು ಎಲ್ಲರಿಗೂ ಸಮಸ್ಯೆಯಾಗುತ್ತಿದೆ. ದಯವಿಟ್ಟು ನಮ್ಮ ಗ್ರಾಮದಲ್ಲೇ ಪಡಿತರ ವಿತರಿಸಲು ವ್ಯವಸ್ಥೆ ಮಾಡಬೇಕೆಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು ಗ್ರಾಮಸ್ಥರ ಹಿತದೃಷ್ಟಿಯಿಂದ ಮುಂದಿನ ತಿಂಗಳಿನಿಂದ ಗ್ರಾಮದಲ್ಲಿಯೇ ಪಡಿತರ ಸಿಗುವಂತೆ ವ್ಯವಸ್ಥೆ ಮಾಡಬೇಕೆಂದು ತಿಳಿಸಿದರು.

ಅರ್ಹ ಫಲಾನುಭವಿಗಳಿಗೆ ಪಡಿತರ ವಿತರಣೆ ಯಾವುದೇ ಅಡೆತಡೆ ಇಲ್ಲದೆ ನಡೆಯಬೇಕು. ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲಿ ಪರಿಶೀಲನೆ ನಡೆಸಿ, ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಪಡಿತರ ವಿತರಣೆಯಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದೆಂದು ಶಾಸಕರು ಹೇಳಿದರು.

ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ‌‌ ಅಗತ್ಯ ಪರಿಹಾರ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಲಾಭ ನೇರವಾಗಿ ಬಡ ಮತ್ತು ಶ್ರಮಿಕ ವರ್ಗದವರಿಗೆ ತಲುಪಬೇಕು ಎಂಬ ಉದ್ದೇಶದಿಂದ ಗ್ರಾಮ‌ ಸಂಚಾರ ನಡೆಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದ್ದು, ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದರು.

ಇದೇ ವೇಳೆ ಗ್ರಾಮಸ್ಥರಿಂದ ವಿದ್ಯುತ್, ಬಸ್ ವ್ಯವಸ್ಥೆ, ಹೊಲಗಳಿಗೆ ದಾರಿ, ಪಿಂಚಣಿ, ವಿಧವಾ ವೇತನ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರರಾದ ಅಮಿತ ಕುಲಕರ್ಣಿ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಹಣಮಂತರಾಯ ಕೌಟಗೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಲೋಕೋಪಯೋಗಿ ಉಲಾಖೆ ಎಇಇ ಪ್ರೇಮಸಾಗರ, ಪಂಚಾಯತ ರಾಜ್ ಎಂಜಿನಿಯರಿಂಗ್ ಇಲಾಖೆ ಎಇಇ ಸುನೀಲ ಚಿಲ್ಲರ್ಗೆ, ಜೆಸ್ಕಾಂ ಎಇಇ ರವಿ ಕಾರಬಾರಿ, ಸಹಾಯಕ ಕೃಷಿ ನಿರ್ದೇಶಕ ಧೂಳಪ್ಪ ಮುಖಂಡರಾದ ಧೊಂಡಿಬಾ ನರೋಟೆ, ಶಿವಾಜಿರಾವ ಪಾಟೀಲ ಮುಂಗನಾಳ, ಸುರೇಶ ಬೋಸ್ಲೆ, ಅರಹಂತ ಸಾವಳೆ, ಶಿವರಾಜ ಅಲ್ಮಾಜೆ, ಗಿರೀಶ ವಡೆಯರ್, ಬಾಬುರಾವ ತೋರ್ಣಾವಾಡಿ, ರಾಹುಲ ಪಾಟೀಲ, ವಿಷ್ಣು, ಭರತ ಕದಂ, ಅಶೋಕ ಮೇತ್ರೆ, ಉದಯ ಸೋಲಾಪೂರೆ, ಗಜಾನಂದ ವಟಗೆ, ಪ್ರವೀಣ ಸಿಗ್ರೆ, ಶಾಂತಕುಮಾರ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.