ಮರುಳು ಶಂಕರ ದೇವ ರಾಜ್ಯಮಟ್ಟದ ಪ್ರಶಸ್ತಿಗೆ ಡಾ. ರಮೇಶ್ ಶಂಕರ್ ಚೌವ್ಹಾಣ ಆಯ್ಕೆ
ಮರುಳು ಶಂಕರ ದೇವ ರಾಜ್ಯಮಟ್ಟದ ಪ್ರಶಸ್ತಿಗೆ ಡಾ. ರಮೇಶ್ ಶಂಕರ್ ಚೌವ್ಹಾಣ ಆಯ್ಕೆ
ಕಮಲನಗರ, ಜೂನ್ 7: ಬಾಲ್ಕಿಯ ತಾಲ್ಲೂಕಿನ ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ 2025ನೇ ಸಾಲಿನ ರಾಜ್ಯಮಟ್ಟದ ಪ್ರತಿಷ್ಠಿತ ಮರುಳು ಶಂಕರ ದೇವ ಪ್ರಶಸ್ತಿಗೆ ಶಿಕ್ಷಣತಜ್ಞ, ಸಾಹಿತಿ ಹಾಗೂ ಸಂಶೋಧಕರಾದ ಡಾ. ರಮೇಶ್ ಶಂಕರ್ ಚೌವ್ಹಾಣ ಅವರು ಆಯ್ಕೆಯಾಗಿದ್ದಾರೆ.
ಡಾ. ರಮೇಶ್ ಶಂಕರ್ ಚೌವ್ಹಾಣ ಅವರು ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಶಿಕ್ಷಣ ಮತ್ತು ಸಮಾಜಮುಖಿ ವಿಷಯಗಳಿಗೆ ಸಂಬಂಧಿಸಿದ ಅನೇಕ ಲೇಖನಗಳನ್ನು ಪ್ರಕಟಿಸಿದ್ದಾರೆ. ಪ್ರಸ್ತುತ ಕಮಲನಗರ ಶ್ರೀ ಸಿದ್ದರಾಮೇಶ್ವರ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಕೊಡುಗೆ ನೀಡುತ್ತಿದ್ದಾರೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಲಕೋರ ತಾಂಡ ಗ್ರಾಮದ ಮೂಲ ನಿವಾಸಿಯಾಗಿರುವ ಡಾ. ಚೌವ್ಹಾಣ
ಅವರು ಗ್ರಾಮೀಣ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದಿದ್ದರೂ, ತಮ್ಮ ನಿರಂತರ ಪರಿಶ್ರಮ, ಅಧ್ಯಯನಶೀಲತೆ ಮತ್ತು ಸಾಧನೆಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ. ಓದು ಮತ್ತು ಬರವಣಿಗೆಯನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿಸಿಕೊಂಡಿರುವ ಅವರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಕನ್ನಡ ಉಳಿಸಿ ಬೆಳೆಸಲು ನಿರಂತರ ಶ್ರಮಿಸುತ್ತಿದ್ದಾರೆ
ಅವರ ಸಮಗ್ರ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ 2025ನೇ ಸಾಲಿನ ಮರುಳು ಶಂಕರದೇವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಮಕ್ತುಂಬಿ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
