ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ಆಗಸ್ಟ್ ೧೩ರ ಕರ್ನಾಟಕ ಬಂದ್ಗೆ ಕರವೇ ಬೆಂಬಲ - ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ಆಗಸ್ಟ್ ೧೩ರ ಕರ್ನಾಟಕ ಬಂದ್ಗೆ ಕರವೇ ಬೆಂಬಲ - ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
ಕಲಬುರಗಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಹಾಗೂ ಆಗಸ್ಟ್ ೧೩ರಂದು ನಡೆಯಲಿರುವ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ನೇತೃತ್ವ) ಉತ್ತರ ಕರ್ನಾಟಕ ಘಟಕದ ವತಿಯಿಂದ ಶನಿವಾರ ರಾತ್ರಿ ಕಲಬುರಗಿಯಲ್ಲಿ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ನಗರದ ಮಿನಿ ವಿಧಾನಸೌಧ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಉತ್ತರ ಕರ್ನಾಟಕ ಘಟಕದ ಅಧ್ಯಕ್ಷ ಡಾ. ಶರಣು ಬಿ. ಗದ್ದುಗೆ, ರಾಜ್ಯದಲ್ಲಿ ಈ ವರ್ಷ ಸಮರ್ಪಕ ಮಳೆಯಾಗದ ಕಾರಣ ತೀವ್ರ ನೀರಿನ ಅಭಾವ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದು ರಾಜ್ಯದ ರೈತರು ಹಾಗೂ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಹೇಳಿದರು.
ಕಾವೇರಿ ನೀರು ನಿಯಂತ್ರಣ ಸಮಿತಿ (ಅWಖಅ) ತಮಿಳುನಾಡಿಗೆ ಪ್ರತಿದಿನ ೩,೫೦೦ ಕ್ಯೂಸೆಕ್ನಂತೆ ನಾಲ್ಕು ಟಿಎಂಸಿ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಖಂಡಿಸಿದ ಅವರು, ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿದರು. ಸರ್ಕಾರ ನೀರು ಹರಿಸಲು ಮುಂದಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದರ ಜೊತೆಗೆ ಆಗಸ್ಟ್ ೧೩ರ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ, ಸಮರ್ಪಕ ಮಳೆಯ ಕೊರತೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಕೂಡಲೇ ಈ ಪ್ರದೇಶವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಬೆಳೆಹಾನಿ ಪರಿಹಾರ, ಬೆಳೆ ವಿಮೆ ಹಾಗೂ ಅಗತ್ಯ ನೆರವು ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ಅಧ್ಯಕ್ಷ ಅಭಿಷೇಕ್ ಬಾಲಾಜಿ, ವಿಭಾಗದ ಪ್ರಧಾನ ಕಾರ್ಯದರ್ಶಿ ಗೋಪಾಲ ನಾಟೀಕಾರ, ವಿಜಯಕುಮಾರ್ ಅಂಕಲಗಿ, ಮನೋಹರ ಬೀರನೂರ್, ಮಂಜುನಾಥ್ ನಾಲವಾರ, ನಾಗರಾಜ್ ಪೂಜಾರಿ ಧಮೂರ್, ವಿಜಯ್ ಅಂಕಲಗಿ, ಅನಿಲ್ ಗಾಯಕೋಡ್, ಅಂಬರೀಶ್ ಶಾಬದಕರ್, ಸತೀಶ್ ಬೀರನೂರ್, ಶರಣು ದ್ಯಾಮ, ಅರವಿಂದ್ ನಾಟೀಕಾರ, ಕಿರಣ್ ನಾಟೀಕಾರ, ನಿಜಲಿಂಗ ಅಗ್ಗಿಮಠ, ಹಣಮಂತ ಬಿರಾದಾರ್, ವಿರೇಶ್ ಹೆಬುಗ್ಗ, ಪುಟ್ಟು ವಾಗಿ, ಅಂಬರೀಷ್ ಫಾರೂಜಾಬಾದ್, ಪ್ರಶಾಂತ್ ಕುಲಕರ್ಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ಪ್ರತಿಭಟನೆಯ ವೇಳೆ ಮೇಣದಬತ್ತಿ ಹಿಡಿದು ರಾಜ್ಯದ ಹಿತಾಸಕ್ತಿ ಕಾಪಾಡುವಂತೆ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ಸರ್ಕಾರ ದೃಢ ನಿಲುವು ತಾಳಬೇಕು ಹಾಗೂ ರೈತರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

