ಕಲಬುರ್ಗಿ ಜಿಲ್ಲೆ ಬರಪೀಡಿತ ಎಂದು ಘೋಷಿಸಿ : ಡಾ ಅವಿನಾಶ್ ಎಸ್ ದೇವನೂರು

ಕಲಬುರ್ಗಿ ಜಿಲ್ಲೆ ಬರಪೀಡಿತ ಎಂದು ಘೋಷಿಸಿ : ಡಾ ಅವಿನಾಶ್ ಎಸ್ ದೇವನೂರು

ಕಲಬುರ್ಗಿ ಜಿಲ್ಲೆ ಬರಪೀಡಿತ ಎಂದು ಘೋಷಿಸಿ : ಡಾ ಅವಿನಾಶ್ ಎಸ್ ದೇವನೂರು

ಆಳಂದ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಮರ್ಪಕ ಮಳೆಯಾಗದೆ ಜಿಲ್ಲೆಯ ವಿವಿಧೆಡೆ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ತುರ್ತು ಪರಿಹಾರ ಒದಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಡಾ. ಅವಿನಾಶ ಎಸ್. ದೇವನೂರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಜಿಲ್ಲೆಯ ಹಲವು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬಿತ್ತನೆಯಾದ ಬೆಳೆಗಳು ತೇವಾಂಶದ ಕೊರತೆಯಿಂದ ಬಳಲುತ್ತಿವೆ. ತೊಗರಿ, ಸೋಯಾಬೀನ್, ಹೆಸರು, ಉದ್ದು ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದ್ದು, ಕೆಲವೆಡೆ ಬೆಳೆಗಳು ಒಣಗುವ ಹಂತ ತಲುಪಿವೆ. ಇದರಿಂದ ಬಿತ್ತನೆ, ಬೀಜ, ರಸಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ಮಾಡಿರುವ ಖರ್ಚು ರೈತರ ಪಾಲಿಗೆ ಹೊರೆಯಾಗಿ ಪರಿಣಮಿಸಿದೆ ಎಂದು ಅವರು ತಿಳಿಸಿದ್ದಾರೆ.

ಮಳೆ ಕೊರತೆಯಿಂದ ಕೃಷಿ ಉತ್ಪಾದನೆ ಕುಸಿಯುವ ಆತಂಕದ ಜತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಕೂಲಿ ಕೆಲಸಕ್ಕೂ ಹೊಡೆತ ಬೀಳುವ ಸಾಧ್ಯತೆ ಇದೆ. ಕೃಷಿಯನ್ನೇ ಅವಲಂಬಿಸಿರುವ ರೈತರು ಮತ್ತು ಕೂಲಿ ಕಾರ್ಮಿಕರ ಕುಟುಂಬಗಳ ಆದಾಯದ ಮೇಲೆ ಪರಿಣಾಮ ಬೀರುವ ಮುನ್ನ ಸರ್ಕಾರ ಸಮಗ್ರ ಕ್ರಮ ಕೈಗೊಳ್ಳಬೇಕು ಎಂದು ದೇವನೂರ ಒತ್ತಾಯಿಸಿದ್ದಾರೆ.

ಮಧ್ಯಂತರ ಬೆಳೆ ಪರಿಹಾರ ನೀಡಲಿ

ಮಳೆ ಕೊರತೆಯಿಂದ ಬೆಳೆಗಳಿಗೆ ಹಾನಿಯಾಗಿರುವ ಪ್ರದೇಶಗಳಲ್ಲಿ ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರ ಹಾಗೂ ಅಗತ್ಯ ಆರ್ಥಿಕ ನೆರವು ಒದಗಿಸಬೇಕು. ಬೆಳೆ ವಿಮೆ ಪಾವತಿಯಲ್ಲಿ ವಿಳಂಬವಾಗದಂತೆ ವಿಮಾ ಕಂಪನಿಗಳು ಮತ್ತು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ರೈತರ ಖಾತೆಗಳಿಗೆ ಹಣ ಜಮೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈಗಾಗಲೇ ಕೃಷಿ ವೆಚ್ಚ ಹೆಚ್ಚಾಗಿರುವ ಸಂದರ್ಭದಲ್ಲಿ ಮಳೆ ಕೈಕೊಟ್ಟರೆ ರೈತರು ಸಾಲದ ಸುಳಿಗೆ ಸಿಲುಕುವ ಅಪಾಯವಿದೆ. ಹೀಗಾಗಿ ಕೇವಲ ಬೆಳೆ ಹಾನಿ ಅಂದಾಜಿಗೆ ಸೀಮಿತವಾಗದೆ ರೈತರ ವಾಸ್ತವ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ ಪರಿಹಾರ ಕ್ರಮ ರೂಪಿಸಬೇಕು ಎಂದು ಹೇಳಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಮುನ್ನ ಕ್ರಮ

ಮಳೆ ಕೊರತೆಯ ಪರಿಣಾಮ ಕೃಷಿ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ. ಗ್ರಾಮೀಣ ಪ್ರದೇಶಗಳಲ್ಲಿನ ಜಲಮೂಲಗಳ ಸ್ಥಿತಿಗತಿ ಪರಿಶೀಲಿಸಿ, ನೀರಿನ ಕೊರತೆ ಎದುರಾಗುವ ಗ್ರಾಮಗಳನ್ನು ಈಗಲೇ ಗುರುತಿಸಬೇಕು. ಅಗತ್ಯವಿರುವ ಕಡೆ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಡಾ. ಅವಿನಾಶ ಎಸ್. ದೇವನೂರ ಒತ್ತಾಯಿಸಿದ್ದಾರೆ.

ಕೂಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸಿ

ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಕುಂಠಿತವಾದರೆ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗದ ಕೊರತೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ( ವಿಬಿಜಿ ರಾಮಜಿ ) ಯೋಜನೆಯಡಿ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಿ, ಅರ್ಹ ಕಾರ್ಮಿಕರಿಗೆ ನಿರಂತರ ಕೆಲಸ ಮತ್ತು ಕೂಲಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಮಳೆ, ಬೆಳೆ ಪರಿಸ್ಥಿತಿ ಹಾಗೂ ಜಲಮೂಲಗಳ ಕುರಿತು ವೈಜ್ಞಾನಿಕ ಹಾಗೂ ಗ್ರಾಮವಾರು ಸಮೀಕ್ಷೆ ನಡೆಸಿ ವಾಸ್ತವ ವರದಿ ಸಿದ್ಧಪಡಿಸಬೇಕು. ಅದರ ಆಧಾರದ ಮೇಲೆ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಗ್ರಾಮೀಣ ಜನರಿಗೆ ಅಗತ್ಯ ನೆರವು ನೀಡಲು ಸರ್ಕಾರ ಮುಂದಾಗಬೇಕು ಎಂದು ಡಾ. ಅವಿನಾಶ ಎಸ್. ದೇವನೂರ ಒತ್ತಾಯಿಸಿದ್ದಾರೆ.